
ಬೆಂಗಳೂರು: ಮಕ್ಕಳ ಸುಪರ್ದಿಗೆ ಕೋರುವ ಅರ್ಜಿಗಳನ್ನು ಅವರು ವಾಸವಿರುವ ಪ್ರದೇಶದ ವ್ಯಾಪ್ತಿಯ ನ್ಯಾಯಾಲಯದಲ್ಲಿ ಮಾತ್ರ ಸಲ್ಲಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ.
ಚಾಮರಾಜನಗರ ಜಿಲ್ಲೆ ನಿವಾಸಿಗಳಾದ ಸಮೀವುಲ್ಲಾ ಮತ್ತು ಮುಬೀನ್ ತಾಜ್ ದಂಪತಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಡೆಸಿತು.
ಪ್ರಕರಣದಲ್ಲಿ ಅರ್ಜಿದಾರರ ಮೊಮ್ಮಗು ಚಾಮರಾಜನಗರದಲ್ಲಿ ನೆಲೆಸಿದೆ. ಮಗುವಿನ ಸುಪರ್ದಿ ಕೋರಿ ತಂದೆ ಮೈಸೂರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪು ಪ್ರಕಾರ ಮಗುವಿನ ಸುಪರ್ದಿಗೆ ಕೋರಿ ಎಲ್ಲೆಂದರಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಮಗು ನೆಲೆಸಿರುವ ವ್ಯಾಪ್ತಿಯ ಸ್ಥಳೀಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬೇಕು. ಅದರಂತೆ ತಂದೆಯು ಚಾಮರಾಮನಗರದ ಸಂಬಂಧಪಟ್ಟ ನ್ಯಾಯಾಲಯಲ್ಲಿಯೇ ಮಗುವಿನ ಸುಪರ್ದಿಗೆ ಅರ್ಜಿ ಸಲ್ಲಿಸಬೇಕು ಎಂದು ಪೀಠ ಆದೇಶಿಸಿದೆ.
ಮಗು ಚಾಮರಾಜನಗರ ಜಿಲ್ಲೆಯಲ್ಲಿ ನೆಲೆಸಿರುವ ಕಾರಣ, ಸಂಬಂಧಪಟ್ಟ ಸ್ಥಳೀಯ ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸಬೇಕಿದೆ. ಮೈಸೂರಿನ ಕೌಟುಂಬಿಕ ನ್ಯಾಯಾಲಯವು ಮಗುವಿನ ತಂದೆಯ ಅರ್ಜಿಯನ್ನು ವಿಚಾರಣೆ ನಡೆಸಲು ಪ್ರಾದೇಶಿಕ ವ್ಯಾಪ್ತಿ ಹೊಂದಿಲ್ಲ ಎಂದು ನ್ಯಾಯಾಲಯ ನಿರ್ಧರಿಸಿದೆ.